ಕಳೆದ ವರ್ಷ IBPS ಪರೀಕ್ಷೆಯಲ್ಲಿ ಕನ್ನಡಿಗರಿಗೆ ಆದ್ಯತೆ ಕೊಡಬೇಕು ಎಂದು ಸಂಸತ್ ನಲ್ಲಿ ಧ್ವನಿ ಎತ್ತಿದ್ದ ಸಂಸದ ಜಿಸಿ ಚಂದ್ರಶೇಖರ್ ಇಂದು ಮತ್ತೆ ಸಂಸತ್ನಲ್ಲಿ ಕನ್ನಡ ಕಹಳೆ ಮೊಳಗಿಸಿದ್ದಾರೆ. ಕರ್ನಾಟಕದಲ್ಲಿ ಸೃಷ್ಟಿಯಾಗುವ ಬ್ಯಾಂಕಿಂಗ್ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕೆಂದು ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
“ಈ ಹಿಂದೆ 2014ರ ವರೆಗೆ ಬ್ಯಾಂಕಿಂಗ್ ಕ್ಷೇತ್ರದ ಉದ್ಯೋಗದಲ್ಲಿ ಎಲ್ಲಾ ರಾಜ್ಯಗಳ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತಿತ್ತು. ಆದರೆ ಬಿಜೆಪಿ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಬ್ಯಾಂಕಿಂಗ್ ಪರೀಕ್ಷೆಯನ್ನು ಕೇವಲ ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ಬರೆಯಬೇಕು ಎಂಬ ನಿಯಮವನ್ನು ಜಾರಿಗೊಳಿಸಲಾಗಿದೆ.. ಇದರಿಂದಾಗಿ ಕೇವಲ ಸ್ಥಳೀಯ ಭಾಷೆಯ ಜ್ಞಾನವಿರುವ ಪ್ರತಿಭಾನ್ವಿತರು ಅವಕಾಶ ವಂಚಿತರಾಗುತ್ತಿದ್ದಾರೆ. ಇದು ಕೇವಲ ಕರ್ನಾಟಕ ಮಾತ್ರವಲ್ಲದೆ ಎಲ್ಲಾ ಪ್ರಾದೇಶಿಕ ಭಾಷೆಗಳ ರಾಜ್ಯಗಳು ಈ ಸಮಸ್ಯೆಗಿರುವುದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಈ ಹಿಂದೆಯೂ ನಾನು ಸದನದಲ್ಲಿ ಈ ಬಗ್ಗೆ ಧ್ವನಿಯೆತ್ತಿದ್ದೆ ಆದರೆ ಯಾವುದೇ ಪ್ರಯೋಜನವಾಗಿಲ್ಲ..ಈ ಬಗ್ಗೆ ಗಮನಹರಿಸಿ ಅತ್ಯಂತ ವೇಗವಾಗಿ ಸಮಸ್ಯೆ ಬಗೆಹರಿಸಬೇಕಾಗಿದೆ” ಎಂದು ಕನ್ನಡಿಗರ ಪರವಾಗಿ ಬ್ಯಾಟ್ ಬೀಸಿದ್ದಾರೆ.
#IBPSMosa ದಿಂದ ತಮ್ಮ ಹಕ್ಕನ್ನು ಕಳೆದುಕೊಂಡಿರುವ ನಾಡಿನ ಮಕ್ಕಳ ಪರವಾಗಿ ಸಂಸತ್ ನಲ್ಲಿ ಇಂದು ಧ್ವನಿಯೆತ್ತಿದ್ದೇನೆ, ಇದಕ್ಕೆ ವಿತ್ತ ಸಚಿವೆ @nsitharaman ರವರಿಂದ ಆದಷ್ಟು ಬೇಗ ಬಗೆಹರಿಸುವುದಾಗಿ ಭರವಸೆ ಸಿಕ್ಕಿದೆ pic.twitter.com/cTjNC659Sa
— GC ChandraShekhar (@GCC_MP) June 27, 2019
ಏನಿದು IBPS ವಿವಾದ?
ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್ ನಡೆಸಿದ ಪರೀಕ್ಷೆಯಲ್ಲಿ ಹೊರ ರಾಜ್ಯದ ಶೇ 85ರಿಂದ 100ರಷ್ಟು ಅಭ್ಯರ್ಥಿಗಳು ನೇಮಕಗೊಳ್ಳುತ್ತಾರೆ. ಆದರೆ, ನಮ್ಮ ರಾಜ್ಯದಲ್ಲಿ ಶೇ 20ರಷ್ಟು ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳುತ್ತಾರೆ. ಐಬಿಪಿಎಸ್ ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಪ್ರಾದೇಶಿಕ ಹಾಗೂ ಸ್ಥಳೀಯ ಭಾಷಿಗರಿಗೆ ಮೊದಲ ಪ್ರಾಶಸ್ತ್ಯ ನೀಡಬೇಕೆಂಬ ನಿಯಮವಿದೆ. ಆದರೆ ಈ ನಿಯಮ ಪಾಲನೆ ಆಗುತ್ತಿಲ್ಲ,, ಜೊತೆಗೆ ಮೊದಲು ಇದ್ದ ನಿಯಮವನ್ನು ತಿದ್ದುಪಡಿ ಮಾಡಿ ಬ್ಯಾಂಕಿಂಗ್ ಪರೀಕ್ಷೆಯನ್ನು ಕೇವಲ ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ಬರೆಯಬೇಕು ಎಂಬ ನಿಯಮವನ್ನು 2014ರಲ್ಲಿ ಜಾರಿಗೊಳಿಸಲಾಗಿದೆ..
ಕರ್ನಾಟಕದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕನ್ನಡಿಗರ ಉದ್ಯೋಗಾವಕಾಶಕ್ಕೆ ಆದ್ಯತೆ ನೀಡಬೇಕೆಂಬ ಕುರಿತಂತೆ ಕರ್ನಾಟಕದಾದ್ಯಂತ ಕನ್ನಡಪರ ಸಂಘಟನೆಗಳು ಹೋರಾಟಕ್ಕಿಳಿದು ವರ್ಷಗಳೇ ಕಳೆದಿವೆ.ಬ್ಯಾಂಕುಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳನ್ನು ನೀಡುತ್ತಿಲ್ಲ ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡಿಗರಿಗಿಂತ ಹೊರ ರಾಜ್ಯದವರಿಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗುತ್ತದೆ ಎಂದು ವಿದ್ಯಾರ್ಥಿಗಳ ಆರೋಪವಾಗಿದೆ.
ಐಬಿಪಿಎಸ್ ನಡೆಸಿದ ಪರೀಕ್ಷೆಯಲ್ಲಿ ರಾಜ್ಯದ ಅಭ್ಯರ್ಥಿಗಳನ್ನು ಪರಿಗಣಿಸಲಾಗುತ್ತಿಲ್ಲ. ಈ ಸಂಬಂಧ ಅನ್ಯಾಯಕ್ಕೆ ಒಳಗಾದ ಅಭ್ಯರ್ಥಿಗಳು ಪ್ರತಿಭಟಿಸುತ್ತಲೇ ಬಂದಿದ್ದಾರೆ. ಆದರೆ ಎಷ್ಟೇ ಮನವಿ, ಪ್ರತಿಭಟನೆ, ಹೋರಾಟ ಮಾಡಿದರೂ ಮಾತ್ರ ಹಠ ಹಿಡಿದು ಕೂತಿರುವ ಕೇಂದ್ರ ಸರ್ಕಾರ ಇತ್ತ ಕಡೆ ತಿರುಗಿ ಕೂಡ ನೋಡಿಲ್ಲ…
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
