ನವಲಗುಂದ ಕಾಮದೇವರು ಇಷ್ಟಾರ್ಥ ಸಿದ್ದಿ ದೈವವಾಗಿದ್ದಾರೆ. ಬೇಡಿದವರ ಇಷ್ಟಾರ್ಥಗಳನ್ನು ಕರುಣಿಸುವ ಕಾಮದೇವರು ದೈವ ಎಂದು ಖ್ಯಾತಿ ಪಡೆದಿದ್ದಾರೆ. ಹೋಳಿ ಹುಣ್ಣಿಮೆ ಅಂಗವಾಗಿ ನಡೆಯೋ ಭಕ್ತಿಯ ಜಾತ್ರೆಯಿದು. ರಾಮಲಿಂಗ ಕಾಮದೇವರ ದರ್ಶನಕ್ಕೆಂದು ಕರ್ನಾಟಕವಷ್ಟೇ ಅಲ್ಲ, ಅಕ್ಕಪಕ್ಕದ ರಾಜ್ಯಗಳಿಂದಲೂ ಜನರು ಆಗಮಿಸುತ್ತಾರೆ.
ಈ ರಾಮಲಿಂಗ ಕಾಮದೇವನಿಗೆ ನಡೆದುಕೊಂಡರೆ ಮಕ್ಕಳಾಗದವರಿಗೆ ಮಕ್ಕಳು, ಮದುವೆಯಾಗದವರಿಗೆ ಮದುವೆ ಭಾಗ್ಯ ಲಭಿಸುತ್ತೆ ಅನ್ನೋ ನಂಬಿಕೆ ಇದೆ. ಹೀಗಾಗಿಯೇ ಮಕ್ಕಳಾಗದವರು, ಮದುವೆಯಾಗದ ಯುವಕ ಯುವತಿಯರು ಬಂದು ದರ್ಶನ ಪಡೆಯುತ್ತಾರೆ. ಅನಾರೋಗ್ಯ ಪೀಡಿತರು ಕೂಡ ಇಲ್ಲಿಗೆ ಬಂದು ಹರಕೆ ಮಾಡಿಕೊಳ್ಳುತ್ತಾರೆ. ಒಂದೇ ವರ್ಷದಲ್ಲಿ ಅವರ ಹರಕೆ ತೀರುತ್ತೆ ಅನ್ನೋ ನಂಬಿಕೆ.
ಸಂತಾನ ಭಾಗ್ಯ ಕರುಣಿಸಲು ರಾಮಲಿಂಗತೊಟ್ಟಿಲು, ಕಂಕಣ ಬಾಗ್ಯಕ್ಕಾಗಿ ಬೆಳ್ಳಿಯ ಬಾಸಿಂಗ, ಅನಾರೋಗ್ಯ ನಿವಾರಣೆಗೆ ಬೆಳ್ಳಿ ಕುದುರೆ, ಮನೆ ವಸತಿ ಇಲ್ಲದವರು ಛತ್ರಿ ಛಾಮರ, ಉದ್ಯೋಗ ಬದುಕಿಗೆ ನೆಲೆ ಕಂಡುಕೊಳ್ಳಬೇಕಾದರೆ ಬೆಳ್ಳಿ ಪಾದ ಅಥವಾ ಕುದುರೆ ಹರಕೆ ಹೊತ್ತು ಪೂಜಿಸಿದರೆ ಅವರ ಬೇಡಿಕೆ ಖಂಡಿತಾ ಈಡೇರುತ್ತದೆ ಎಂಬ ಪ್ರತೀತಿ ಇದೆ. ಇಷ್ಠಾರ್ಥ ಸಿದ್ದಿ ಕಲ್ಪಿಸಿದ ನಂತರ ಇನ್ನೊಂದು ಬೆಳ್ಳಿ ಸಾಮಗ್ರಿ ಕಾಮಣ್ಣನಿಗೆ ಸಮರ್ಪಿಸಬೇಕು. ಹರಕೆ ತೀರಿಸುವ ಭಕ್ತರಿಗೆ ಸಂಘಟಕರೇ ಶುಲ್ಕ ವಿಧಿಸಿ ಪೂಜೆ ಪೂರೈಸುತ್ತಾರೆ.
ಹುಣ್ಣಿಮೆ ಮರುದಿನ ರಾಮಲಿಂಗ ಕಾಮಣ್ಣನ ಮೆರವಣಿಗೆ ನಡೆಸಿ ಬೆಳಿಗ್ಗೆ ಕಾಮದಹನ ಮಾಡುತ್ತಾರೆ. ಇದೇ ಸಂದರ್ಭದಲ್ಲಿ ರಾಮಲಿಂಗ ಕಾಮಣ್ಣನ ಮೂಲ ಮೂರ್ತಿ ತೆಗೆದು ಅದರ ಬದಲಾಗಿ ಗಡಿಗೆ ಹಾಕಿ ಅಗ್ನಿಸ್ಪರ್ಶ ಮಾಡಲಾಗುತ್ತದೆ. ದಹನಗೊಳ್ಳುತ್ತಿರುವ ಕಾಮಣ್ಣನ ಗಡಿಗೆ ಮುಂದೆ ಬಿದ್ದರೆ ಮುಂಗಾರು ಉತ್ತಮ ಫಸಲು, ಹಿಂದೆ ವಾಲಿದರೆ ಹಿಂಗಾರು ಫಸಲು ಉತ್ತಮವಾಗಿ ಬರುತ್ತದೆಂಬ ವಾಡಿಕೆ ಇದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
