ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಫಲಿತಾಂಶ ಹೊರಬೀಳುತ್ತಿದ್ದಂತೆ ಒಂದು ಕಡೆ ಕಾಂಗ್ರೆಸ್ ಪಕ್ಷ ತನ್ನ ಬಹುಮತವನ್ನು ಹೆಚ್ಚಿಸಿಕೊಳ್ಳುತ್ತಿದ್ದರೇ ಬಿಜೆಪಿ 70 ಸೀಟುಗಳನ್ನ ದಾಟಲು ತಿಣಕಾಡುತ್ತಿದೆ.
ಇನ್ನು ಭಾರಿ ಕುತೂಹಲ ಕೆರಳಿಸಿದ್ದ ಕನಕಪುರ ಕ್ಷೇತ್ರದಲ್ಲಿ ಆರ್. ಅಶೋಕ್ ಅವರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇಲ್ಲಿ ಬಿಜೆಪಿಯ ಅಭ್ಯರ್ಥಿ ಆರ್ ಅಶೋಕ್ ಮೂರನೇ ಸ್ಥಾನ ಪಡೆದುಕೊಂಡು ತೀವ್ರ ಮುಖಭಂಗ ಅನುಭವಿಸಿದ್ದಾರೆ. ಡಿಕೆ ಶಿವಕುಮಾರ್ ಬರೋಬ್ಬರಿ 1,22,392 ಮತಗಳ ಅಂತರದಿಂದ ಭಾರೀ ಗೆಲುವು ಸಾಧಿಸಿದ್ದು, ರಾಜ್ಯದಲ್ಲೇ ದಾಖಲೆ ಗೆಲುವು ಸಾಧಿಸಿದ್ದಾರೆ.
ಡಿಕೆ ಶಿವಕುಮಾರ್ 1,43,023 ಮತಗಳನ್ನು ಪಡೆದುಕೊಂಡಿದ್ದು, ಇನ್ನುಳಿದ ಎಲ್ಲ ಅಭ್ಯರ್ಥಿಗಳು ಇಲ್ಲಿ ಠೇವಣಿ ಕಳೆದುಕೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಾಗರಾಜು 20,631 ಮತಗಳನ್ನು ಪಡೆದು ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡರೆ, ಬಿಜೆಪಿಯ ಆರ್. ಅಶೋಕ್ ಕೇವಲ 19,753 ಮತಗಳನ್ನಷ್ಟೆ ಪಡೆದುಕೊಂಡು ಹೀನಾಯ ಸೋಲು ಅನುಭವಿಸಿದ್ದಾರೆ.
ಅಂದಹಾಗೆ ಬಹುತೇಕ ಎಲ್ಲಾ ಎಕ್ಸಿಟ್ ಪೋಲ್ಗಳು ಭವಿಷ್ಯ ನುಡಿದಂತೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಗಳಿಸಿದೆ. ಎಕ್ಸಿಟ್ ಪೋಲ್ ಗಳ ನಿರೀಕ್ಷೆಗೂ ಮೀರಿ ಕಾಂಗ್ರೆಸ್ ಬಹುಮತ ಸಾಧಿಸಿರುವುದು ಗಮನಾರ್ಹ. 224 ಸ್ಥಾನಗಳ ಕರ್ನಾಟಕ ವಿಧಾನಸಭೆಯಲ್ಲಿ ಅಧಿಕಾರಕ್ಕೆ ಬೇಕಾದ ಮ್ಯಾಜಿಕ್ ಫಿಗರ್ 113. ಕಾಂಗ್ರೆಸ್ ಪಕ್ಷವು ಈಗಾಗಲೇ 138 ಸ್ಥಾನಗಳಲ್ಲಿ ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
